ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಗೆ ಪತ್ರ ಬರೆದಿದ್ದು. ಪ್ರವಾಸಿ ಕೇಂದ್ರ ಮುತ್ತತ್ತಿ ಬಳಿ ಹರಿಯುವ ಕಾವೇರಿ ನದಿಯಲ್ಲಿ ಪ್ರವಾಸಿಗರು ನಿರಂತರವಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದು, ಈ ಕುರಿತು ಪ್ರವಾಸಿಗರ ರಕ್ಷಣೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಮಂಡ್ಯ (Mandya) ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಕ್ಷೇತ್ರ ಮುತ್ತತ್ತಿಯಲ್ಲಿರುವ (Muttatti) ಕಾವೇರಿ ನದಿಯಲ್ಲಿ (Cauvery River) ನಿರಂತರವಾಗಿ ನಡೆಯುತ್ತಿರುವ ಅವಘಡಗಳ ಬಗ್ಗೆ ಕುಮಾರಸ್ವಾಮಿ (HD Kumaraswamy) ಅವರು ಬೆಳಕು ಚೆಲ್ಲಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೇ ಒಂದೇ ಕುಟುಂಬದ ಐವರು ನದಿಯಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದರು. ಇದೇ ರೀತಿ ನಿರಂತರವಾಗಿ ಪ್ರವಾಸಿಗರು ನೀರಿನ ಸುಳಿಗಳಿಗೆ ಸಿಲುಕಿ ಜೀವ ಕಳೆದುಕೊಳ್ಳುತ್ತಿದ್ದು. ಕಳೆದ 5 ದಿನಗಳಲ್ಲಿ 11 ಜನ ಪ್ರಾಣ ಕಳೆದುಕೊಂಡಿದ್ದಾರೆ.
ಮುತ್ತತ್ತಿಯ ಕಾವೇರಿ ನದಿ ಭಾಗದ ಪ್ರದೇಶದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಎಚ್ಚರಿಕೆಯ ಫಲಕಗಳನ್ನು ಅಳವಡಿಸಬೇಕು ಮತ್ತು ನದಿಗೆ ಇಳಿಯದಂತೆ ತಡೆಯಲು ದಂಡೆಯ ಉದ್ದಕ್ಕೂ ಮುಳ್ಳಿನ ತಂತಿ-ಬ್ಯಾರಿಕೇಡ್ಗಳನ್ನು ಅಳವಡಿಸಲು ತುರ್ತುಕ್ರಮ ವಹಿಸಬೇಕು. ಗ್ರಾಮದಲ್ಲಿ ಪೊಲೀಸ್ ಉಪಠಾಣೆ ತೆರೆಯುವ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
ನದಿಯಲ್ಲಿ ನಿಗೂಢವಾಗಿರುವ ಸುಳಿಗಳಿಗೆ ಸಿಲುಕಿ ಪ್ರವಾಸಿಗರು ಜೀವ ತೆರುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ಐದು ತಿಂಗಳಲ್ಲಿ 11ಕ್ಕೂ ಹೆಚ್ಚು ಪ್ರವಾಸಿಗರು ಈಜಲು ಹೋಗಿ ದುರಂತ ಮರಣ ಹೊಂದಿದ್ದಾರೆ. ಕಳೆದ ಐದು ವರ್ಷಗಳಲ್ಲಿ 36ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ಅಂಕಿ ಅಂಶಗಳು ಹೇಳುತ್ತವೆ. ಈ ಸಾವುಗಳಿಗೆ ತಡೆ ಹಾಕುವ ತುರ್ತು ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮುತ್ತತ್ತಿ ಕ್ಷೇತ್ರವು ನಾಡಿನಲ್ಲಿ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಇಲ್ಲಿನ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಬರುತ್ತಾರೆ. ಭಕ್ತರು ನದಿಗೆ ಇಳಿದು ಪುಣ್ಯಸ್ನಾನ ಮಾಡುತ್ತಾರೆ. ಆದರೆ ಇಲ್ಲಿ ಎಚ್ಚರಿಕೆ ಫಲಕಗಳು, ರಕ್ಷಣಾ ಸಿಬ್ಬಂದಿ ಇಲ್ಲದ ಕಾರಣ ತಮಗೆ ಅರಿವಿಲ್ಲದೆಯೇ ಜನರು ಸಾವಿನ ದವಡೆಗೆ ಸಿಲುಕುತ್ತಿದ್ದಾರೆ. ಇದು ಕಳವಳಕಾರಿ ಎಂದು ಗಮನ ಸೆಳೆದಿದ್ದಾರೆ.