ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ(Guarantee scheme)ಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ’ (Gruhalakshmi) ಯೋಜನೆ ಪರಿಷ್ಕರಣೆ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಫಿಲ್ಟರ್ ಮಾಡಿದ್ದು, ನೋಂದಣಿಯಾದ 1.30 ಕೋಟಿ ಮಂದಿ ಪೈಕಿ 3.89 ಲಕ್ಷ ಮಂದಿಯನ್ನು ಫಲಾನುಭವಿಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ.
1.94 ಲಕ್ಷ ಫನಾನುಭವಿಗಳು ಐಟಿ ಜಿಎಸ್ಟಿ ಪಾವತಿಸುವವರು ಆಗಿದ್ದರೆ, 1.95 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು 3.89 ಲಕ್ಷ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆ ಬಂದ್ ಮಾಡಲಾಗಿದೆ. ಅದರಲ್ಲೂ ಬೆಂಗಳೂರು ನಗರ ಜಿಲ್ಲೆಯಲ್ಲಿ 47,871 ಅನರ್ಹ ಫಲಾನುಭವಿಗಳು ಪತ್ತೆಯಾಗಿದ್ದಾರೆ. ತಾಂತ್ರಿಕ ಲೋಪ ತಡೆಯಲು ಶೀಘ್ರದಲ್ಲೇ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ಬರಲಿದ್ದು, ಈ ಪರಿಷ್ಕರಣೆಯಿಂದ ಸರ್ಕಾರದ ಬೊಕ್ಕಸಕ್ಕೆ ಮಾಸಿಕ ಬರೋಬ್ಬರಿ 77 ಕೋಟಿ ರೂ. ಉಳಿತಾಯವಾಗಲಿದೆ.
ಬಯೋಮೆಟ್ರಕ್ ಕಡ್ಡಾಯ..!
ಸದ್ಯದ ಸೂಚನೆಯಂತೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಒಂದು ತಿಂಗಳೊಳಗೆ ಬಯೋಮೆಟ್ರಿಕ್ ದೃಢೀಕರಣ ಪೂರ್ಣಗೊಳಿಸಬೇಕು. ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದಿದ್ದರೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿರುವ 2 ಸಾವಿರ ರೂಪಾಯ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಯೋಜನೆಯ ನಿಜವಾದ ಫಲಾನುಭವಿಗಳನ್ನು ಗುರುತಿಸುವುದು ಹಾಗೂ ಅರ್ಹರಲ್ಲದವರ ಹೆಸರನ್ನ ಪಟ್ಟಿಯಿಂದ ತೆರವುಗೊಳಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಹಿನ್ನಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳು ಯಾವುದೇ ವಿಳಂಬ ಮಾಡದೆ ಸಮೀಪದ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಬಯೋಮೆಟ್ರಿಕ್ ಧೃಡೀಕರಣ ಪೂರ್ಣಗೊಳಿಸಬೇಕಿದೆ.