ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಿರುವುದಕ್ಕೆ ಮಾಜಿ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರಿಗೆ ಪುತ್ರ ವ್ಯಾಮೋಹ ಜಾಸ್ತಿಯಾಗಿದೆ. ಅನುಭವ ಇಲ್ಲದ ಮಂಗ ಯತೀಂದ್ರ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕೊಟ್ಟಿದ್ದು ಸರಿಯಲ್ಲ ಎಂದು ಕಿಡಿಕಾ lರಿದ್ದಾರೆ
ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಸ್ತಕ್ಷೇಪ ಹೆಚ್ಚಾಗಿದೆ ಎಂದು ಆರೋಪಿಸಿರುವ ವಿಶ್ವನಾಥ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಹೊಸ ಮುಖ್ಯಮಂತ್ರಿಗೆ ತಮ್ಮದೇ ಆದ ಸಚಿವ ಸಂಪುಟ ರಚನೆಗೆ ಅವಕಾಶ ಕಲ್ಪಿಸಬೇಕು ಎಂದಿದ್ದಾರೆ.
ಇದೇ ವೇಳೆ ಯತೀಂದ್ರ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ವಿಶ್ವನಾಥ್, ಸಿದ್ದರಾಮಯ್ಯ ಅವರಿಗೆ ಪುತ್ರ ವ್ಯಾಮೋಹ ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ. ಮೈಸೂರಿನಂತಹ ವಿಶ್ವವಿಖ್ಯಾತ ನಗರಕ್ಕೆ ದೊಡ್ಡ ದೊಡ್ಡ ಗಣ್ಯರು ಆಗಮಿಸುತ್ತಾರೆ. ಅವರೊಂದಿಗೆ ವ್ಯವಹರಿಸಲು ಯತೀಂದ್ರ ಅವರಿಗೆ ಅಗತ್ಯ ಅನುಭವವಿಲ್ಲ ಎಂದು ಹೇಳಿದ್ದಾರೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸರ್ಕಾರ 30 ಸಚಿವರನ್ನು ನಿಯೋಜಿಸಿದ್ದು, ಈ ಹಿನ್ನೆಲೆಯಲ್ಲಿ ಯತೀಂದ್ರ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.