Search


ಕರ್ನಾಟಕಕ್ಕೆ ಮತ್ತೆ ಕಾವೇರಿ ಕಂಟಕ; ನೀರುಗಾಗಿ ಸುಪ್ರೀಂ ಮೊರೆ ಹೋದ ತಮಿಳುನಾಡು

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿಸುವಂತೆ ಒತ್ತಾಯಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ತಮಿಳುನಾಡಿಗೆ ನಿಗದಿಯಾಗಿರುವ ನೀರಿನ ಪಾಲನ್ನು ಕರ್ನಾಟಕದಿಂದ ಬಿಡುಗಡೆ ಮಾಡಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ನಿರ್ದೇಶನಗಳನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂಬುದು ತಮಿಳುನಾಡಿನ ಪ್ರಮುಖ ಆರೋಪವಾಗಿದೆ.

ಮಳೆ ಪ್ರಮಾಣ ಮತ್ತು ಜಲಾಶಯಗಳಲ್ಲಿನ ನೀರಿನ ಲಭ್ಯತೆ ಆಧರಿಸಿ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಪ್ರತಿ ವರ್ಷವೂ ಎರಡೂ ರಾಜ್ಯಗಳ ನಡುವೆ ಸಂಘರ್ಷ ಉಂಟಾಗುತ್ತದೆ. ಕರ್ನಾಟಕದಲ್ಲಿ ಕುಡಿಯುವ ನೀರು ಮತ್ತು ರೈತರ ನೀರಾವರಿ ಅಗತ್ಯತೆಗಳೇ ಪ್ರಮುಖವಾಗಿದ್ದು, ರಾಜ್ಯದ ಜಲಾಶಯಗಳಲ್ಲಿ ಸಾಕಷ್ಟು ನೀರು ಇಲ್ಲದ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವುದು ಕಷ್ಟವಾಗುತ್ತದೆ ಎಂಬ ವಾದವನ್ನು ಕರ್ನಾಟಕ ಹಲವು ಬಾರಿ ಮುಂದಿಟ್ಟಿದೆ.

ಇದೀಗ ತಮಿಳುನಾಡು ನೇರವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದರಿಂದ ಕಾವೇರಿ ವಿವಾದ ಮತ್ತೆ ಕಾವೇರುವ ಸಾಧ್ಯತೆ ಇದೆ. ತಮಿಳುನಾಡಿನ ಅರ್ಜಿಗೆ ಕರ್ನಾಟಕ ಯಾವ ರೀತಿಯಲ್ಲಿ ಪ್ರತಿಕ್ರಿಯಿಸಲಿದೆ ಎಂಬುದು ಕುತೂಹಲ ಮೂಡಿಸಿದೆ. ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ, ರಾಜ್ಯದ ಕುಡಿಯುವ ನೀರಿನ ಅಗತ್ಯತೆ, ರೈತರ ಬೇಡಿಕೆ ಹಾಗೂ ಕಾವೇರಿ ನೀರು ಹಂಚಿಕೆ ನಿಯಮಗಳನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯಲ್ಲಿ ಯಾವ ನಿರ್ದೇಶನ ನೀಡಲಿದೆ ಎಂಬುದರತ್ತ ಇದೀಗ ಎರಡೂ ರಾಜ್ಯಗಳ ಗಮನ ನೆಟ್ಟಿದೆ.

By Ravikumar - 03-08-2026


Ads in Post