ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಕಾಂಗ್ರೆಸ್ ಹಿರಿಯ ಮುಖಂಡರೂ, ಹರಿಯಾಣ ಉಸ್ತುವಾರಿ ಆಗಿರುವ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಪ್ರಸ್ತಕ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದಾರೆ.
ಬಳಿಕ ಸುದ್ದಿಸಂಸ್ಥೆ ANI ಜೊತೆಗೆ ಬಿಕೆ. ಹರಿಪ್ರಸಾದ್ ಮಾತನಾಡಿದ್ದು, ಇದೊಂದು ಸೌಜನ್ಯಯುತ ಭೇಟಿಯಾಗಿತ್ತು. ಇದರಲ್ಲಿ ಯಾವುದೇ ಕುತೂಹಲವಿಲ್ಲ. ಪಶ್ಚಿಮ ಬಂಗಾಳ ಚುನಾವಣೆ ಮತ್ತು ಹರಿಯಾಣ ರಾಜ್ಯಸಭಾ ಚುನಾವಣೆಗಳಲ್ಲಿ ನಿರತನಾಗಿದ್ದರಿಂದ 3 ತಿಂಗಳಿನಿಂದ ಸಿಎಂ ಭೇಟಿಯಾಗಿರಲಿಲ್ಲ. ಇದೊಂದು ಕೇವಲ ಸೌಜನ್ಯದ ಭೇಟಿ ಹೊರತು ಬೇರೇನೂ ಅಲ್ಲ ಎಂದು ಹೇಳಿದರು.