ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್ನಲ್ಲಿ ಬಿಸಿಬಿಸಿ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ನಿಂದ ಬುಲಾವ್ ಬಂದಿದ್ದು. ರಾಜ್ಯದಲ್ಲಿ ಕಳೆದ ಕೆಲ ತಿಂಗಳಿಂದ ನಡೆಯುತ್ತಿರುವ ನಾಯಕತ್ವ ಬದಲಾವಣೆಗೆ ಚರ್ಚೆಗೆ ಪುಲ್ ಸ್ಟಾಫ್ ಬೀಳುವ ಸಾಧ್ಯತೆ ಇದೆ. ಈಗಾಗಲೇ ಡಿಕೆ ಬ್ರದರ್ಸ್ ದೆಹಲಿಯ ಫ್ಲೈಟ್ ಹತ್ತಿದ್ದು, ಸಿಎಂ ಕೂಡ HALನಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ಸಂಪುಟ ಪುನರ್ ರಚನೆಯಾ / ಸಿಎಂ ಬದಲಾವಣೆಯಾ....!
ನಾಳೆ ಬೆಳಗ್ಗೆ 11 ಗಂಟೆಗೆ ಹೈಕಮಾಂಡ್ ನಾಯಕರ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದು, ದೆಹಲಿಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸಭೆ ನಡೆಯಲಿದೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭಾಗಿ ಸಾಧ್ಯತೆ ಇದ್ದು, ಸಭೆ ಬಳಿಕ ಸಿಎಂ ಸಿದ್ದರಾಮಯ್ಯರಿಂದ ರಾಹುಲ್ ಗಾಂಧಿ ಭೇಟಿ ಅಂದಾಜಿಸಲಾಗಿದೆ. ಸಭೆ ವೇಳೆ ಸಂಪುಟ ಪುನರ್ ರಚನೆ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪ ಸಾಧ್ಯತೆ ಇದ್ದು, ದೆಹಲಿ ಪ್ರವಾಸದ ಬಗ್ಗೆ ಈಗಾಗಲೇ ಸಚಿವರ ಜೊತೆ ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ. ಆ ಮೂಲಕ ದೆಹಲಿ ಭೇಟಿಗೂ ಮುನ್ನ ಸಚಿವರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ.
ದೆಹಲಿಯಲ್ಲಿ ಎರಡು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಸಾಧ್ಯತೆ ಇದ್ದು, ರಾಜ್ಯಸಭಾ ಸ್ಥಾನಗಳ ಹಂಚಿಕೆ ವಿಚಾರವಾಗಿ ಮೊದಲು ಮಾತುಕತೆ ನಡೆಯಲಿದೆ. ಸಂಪುಟ ಪುನಾರಚನೆ ಬಗ್ಗೆಯೂ ಸಿದ್ದರಾಮಯ್ಯ ಪ್ರಸ್ತಾಪ ಮಾಡಲಿದ್ದು, ಪುನಾರಚನೆ ಮಾಡದಿದ್ದರೆ ಏನೇನಾಗಬಹುದೆಂದು ಮನವರಿಕೆ ಮಾಡಿಕೊಡಲಿದ್ದಾರೆ. ಡಿ.ಕೆ.ಶಿವಕುಮಾರ್ ಸಭೆಗೆ ಹಾಜರಾದರೆ ಮಾತ್ರ ನಾಯಕತ್ವ ಬಗ್ಗೆ ಚರ್ಚೆ ನಡೆಯಬಹುದು ಎಂಬ ಮಾತುಗಳು ಕೇಳಿಬಂದಿವೆ.
ಸಿಎಂ ಜೊತೆ ಸಚಿವರು, ಶಾಸಕರ ಪ್ರಯಾಣ
ಈ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಹೌದು, ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ ಎಂದಷ್ಟೇ ತಿಳಿಸಿದ್ದಾರೆ. ಇನ್ನು ಮುಖ್ಯಮಂತ್ರಿಗಳ ಜೊತೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಕೆಲ ಶಾಸಕರೂ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಶಾಸಕರಾದ ಹಂಪನಗೌಡ ಬಾದರ್ಲಿ, ದದ್ದಲ್, ನರೇಂದ್ರಸ್ವಾಮಿ, MLCಗಳಾದ ಶರಣಗೌಡ ಬೈಯ್ಯಾಪುರ, ವಸಂತ್ ಕುಮಾರ್ ಕೂಡ ದೆಹಲಿ ಪ್ರವಾಸ ಕೈಗೊಳ್ಳುವ ಬಗ್ಗೆ ಮಾಹಿತಿ ಸಿಕ್ಕಿದೆ.