Search


ಕೊನೆಯುಸಿರಿನವರೆಗೂ ಕೋಮುವಾದಿಗಳ ವಿರುದ್ದ ಹೋರಾಡುತ್ತೇನೆ : ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರು ರಾಜ್ಯದ ಜನರಿಗೆ ಧನ್ಯವಾದ ಹೇಳಿ ಫೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಸುಮಾರು 48 ವರ್ಷಗಳ ಕಾಲ ರಾಜಕೀಯವಾಗಿ ಕೈ ಹಿಡಿದ ಕನ್ನಡ ಜನತೆಯ ಮುಂದೆ ಸಿದ್ದು ಶಿರಭಾಗಿ ತಮ್ಮ ಕೃತಜ್ಞತೆಯನ್ನ ಅರ್ಪಿಸಿದ್ದಾರೆ. ಅನ್ನರಾಮಯ್ಯ, ಭಾಗ್ಯರಾಮಯ್ಯ, ಕನ್ನಡ ರಾಮಯ್ಯ, ಬಜೆಟ್‌ ರಾಮಯ್ಯ ಎಂದೆಲ್ಲಾ ಕರೆಸಿಕೊಳ್ಳುತ್ತಿದ್ದ ಸಿದ್ದರಾಮಯ್ಯ ಇನ್ನು ಮುಂದೆಯೂ ಸಕ್ರಿಯ ರಾಜಕಾರಣದಲ್ಲಿರುವೆ ಎಂಬ ಸಂದೇಶವನ್ನ ರಾಜ್ಯದ ಜನರಿಗೆ ರವಾನಿಸಿದ್ದಾರೆ. 

ಸಿಎಂ ಸಿದ್ದರಾಮಯ್ಯರ ಪೋಸ್ಟ್‌ನಲ್ಲಿ ಏನಿದೆ...!

ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ. 

ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ. ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ.

ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ.  ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ. 

By Ravikumar - 29-05-2026


Ads in Post