ಬೆಂಗಳೂರು: ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್ಗೆ (Dharmasthala Skull Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯ ಈ ಷಡ್ಯಂತ್ರದ ಕುರಿತು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು. ಈ ಅರ್ಜಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್ಗಳಾದ ಸಮೀರ್ ಎಂ.ಡಿ., ಅಜಯ್, ದಿನೇಶ್ ಸೇರಿದಂತೆ ಹಲವರ ಪಾತ್ರದ ಬಗ್ಗೆ ಉಲ್ಲೇಖಿಸಲಾಗಿದೆ. ನಟ ಪ್ರಕಾಶ್ ರಾಜ್ (Prakash Raj) ಬಗ್ಗೆಯೂ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
50 ಲಕ್ಷ ಕೊಟ್ಟ, ನಿನ್ನನ್ನ ಅಪ್ಪಿಕೊಳ್ಳುತ್ತೀನಿ ಎಂದಿದ್ದ ಪ್ರಕಾಶ್ ರಾಜ್...!
ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ (Writ petition) ಧರ್ಮಸ್ಥಳ ವಿರುದ್ದದ ಷಡ್ಯಂತ್ರವನ್ನ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದು, ಇದರಲ್ಲಿ ನಟ ಪ್ರಕಾಶ್ ರಾಜ್ ಕೂಡ ಭಾಗಿಯಾಗಿದ್ದರು ಎಂಬುದನ್ನ ಉಲ್ಲೇಖಿಸಿದ್ದಾನೆ. ಅಷ್ಟೇ ಅಲ್ಲದೇ ಈ ಸಂಪೂರ್ಣ ಯೋಜನೆಯ ಮೊತ್ತ 200 ಕೋಟಿಯಾಗಿದ್ದು, ವೀರೇಂದ್ರ ಹೆಗ್ಗಡೆಯನ್ನ ಜೈಲಿಗೆ ಕಳಿಹಿಲು ಸಹಕರಿಸಿದರೆ 50 ಲಕ್ಷ ಕೊಡುವುದಾಗಿ ಆಫರ್ ಕೊಟ್ಟಿದ್ದರು ಎಂದು ಚಿನ್ನಯ್ಯ ಆರೋಪಿಸಿದ್ದಾರೆ.
ಗಿರೀಶ್ ಮಟ್ಟಣ್ಣ (Girish Mattannavar) "ತಲೆ ಬುರುಡೆ ನೀಡಿ ಪೊಲೀಸರಿಗೆ ದೂರು ಕೊಟ್ಟ ಬಳಿಕ ಕೇರಳದ ರೆಸಾರ್ಟ್ಗೆ ಕರೆದೊಯ್ದರು. ಅಲ್ಲಿ ರಾತ್ರಿ 8 ಗಂಟೆಗೆ ನಟ ಪ್ರಕಾಶ್ ರಾಜ್ ಅವರಿಗೆ ಕರೆ ಮಾಡಿ ಅರ್ಜಿದಾರರಿಗೆ ಫೋನ್ ನೀಡಿದರು. ಪ್ರಕಾಶ್ ರಾಜ್ ಅವರು ತಮಿಳಿನಲ್ಲಿ ಮಾತನಾಡಿ ಗಿರೀಶ್ ಮಟ್ಟಣ್ಣನವರ್ ಹೇಳಿಕೊಟ್ಟಂತೆ ಹೇಳಿಕೆ ನೀಡಬೇಕು. ತಾವು 29 ನೇ ತಾರೀಕಿಗೆ ಬಂದು ಅಪ್ಪಿಕೊಳ್ಳುವುದಾಗಿ ಹೇಳಿದರು. ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದಾಗ ಸಂಭ್ರಮಿಸಿ ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳುಹಿಸುವ ಸಮಯ ಬಂದಿತೆಂದು ಸಂಭ್ರಮಿಸಿದರು.

ಅಷ್ಟೇ ಅಲ್ಲದೆ "ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣವರ್ ಬಂಗ್ಲೆಗುಡ್ಡದ ಸ್ಥಳ ಗುರುತಿಸಿ ಅಲ್ಲಿ ಉತ್ಖನನ ನಡೆಸಿ ಸರ್ಕಾರದ ಹಣ ವ್ಯಯ ಮಾಡಿಸುವಂತೆ ಸೂಚಿಸಿದರು. ಯೋಜನೆಯ ಬಜೆಟ್ 200 ಕೋಟಿ ಇದ್ದು, ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳುಹಿಸಲು ಸಹಕರಿಸಿದರೆ 50 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದರು. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್ಗಳಾದ ಸಮೀರ್ ಎಂ.ಡಿ., ಅಜಯ್, ದಿನೇಶ್ ಅವರು ಹೇಳಿದ ಜಾಗಗಳನ್ನು SITಗೆ ತೋರಿಸುವಂತೆ ಸೂಚಿಸಿ, ಹಾಗೆ ಮಾಡದಿದ್ದರೆ ತಮ್ಮ ಪತ್ನಿಯನ್ನ ಕೊಲ್ಲುವುದಾಗಿ ಬೆದರಿಕೆ ಹಾಕಿದರು. ಆದರೆ ಅಲ್ಲಿ ಯಾವುದೇ ಶವದ ಅವಶೇಷ ಸಿಗಲಿಲ್ಲ. ಧರ್ಮಸ್ಥಳದ ವಿರುದ್ಧ ಇವರ ಷಡ್ಯಂತ್ರದಿಂದ ಭೀತನಾಗಿ ಸತ್ಯ ಹೇಳಲು ತೀರ್ಮಾನಿಸಿದೆ. ನಂತರ SIT ಮುಂದೆ ಷಡ್ಯಂತ್ರದ ಹೇಳಿಕೆ ನೀಡಿದೆ ಎಂದು ಚಿನ್ನಯ್ಯ ಉಲ್ಲೇಖಿಸಿದ್ದಾನೆ.
ಒಟ್ಟಿನಲ್ಲಿ ಚಿನ್ನಯ್ಯನ ಈ ರಿಟ್ ಅರ್ಜಿಯ ಮೂಲಕ ಧರ್ಮಸ್ಥಳದ ವಿರುದ್ದ ರಾಷ್ಟ್ರೀಯ ಮಟ್ಟದಲ್ಲಿ ಸಂಚು ರೂಪಿಸಿರುವುದು ಬಹಿರಂಗವಾಗಿದ್ದು, ಖ್ಯಾತ ನಾಮ ನಟ ಪ್ರಕಾಶ್ ರಾಜ್ ಈ ಷಡ್ಯಂತ್ರದ ಭಾಗವಾಗಿದ್ದರು ಎಂದು ಚಿನ್ನಯ್ಯ ಆರೋಪಿಸಿದ್ದಾನೆ. ಈ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರ SITಗೆ ನೋಟಿಸ್ ಜಾರಿಗೊಳಿಸಿದೆ. ಜೂನ್ 29 ರೊಳಗೆ SIT ತನಿಖೆಯ ಸ್ಥಿತಿಗತಿ ಬಗ್ಗೆ ವಿವರ ಒದಗಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.