ಬೆಂಗಳೂರು: ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಪಾದಯಾತ್ರೆ ಆರಂಭಿಸಿರುವ ಬೆನ್ನಲ್ಲೇ, ವಿರೋಧ ಪಕ್ಷದ ರಾಜಕೀಯ ಪ್ರಚಾರಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಸರ್ಕಾರ ತಂತ್ರ ರೂಪಿಸುತ್ತಿದೆ. ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ಕೂಡ ಸೂಕ್ತ ಉತ್ತರ ನೀಡಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಪಾದಯಾತ್ರೆಯನ್ನು ರಾಜಕೀಯವಾಗಿ ಹೇಗೆ ಎದುರಿಸಬೇಕು ಎಂಬ ಕುರಿತು ಕಾಂಗ್ರೆಸ್ ನಾಯಕತ್ವ ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಆದರೆ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳು, ಬರ ಪರಿಹಾರ ಕ್ರಮಗಳು ಹಾಗೂ ರೈತರು ಮತ್ತು ದುರ್ಬಲ ವರ್ಗಗಳ ಪರ ಕೈಗೊಂಡಿರುವ ಕ್ರಮಗಳನ್ನು ಜನರ ಮುಂದಿಡುವ ಮೂಲಕ ಪ್ರತಿತಂತ್ರ ರೂಪಿಸುವ ಸಾಧ್ಯತೆ ಇದೆ.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಹಿಂದೆ ನಡೆದ ತಪ್ಪುಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ನಾಯಕರು “ಪ್ರಾಯಶ್ಚಿತ್ತ ಯಾತ್ರೆ” ನಡೆಸುತ್ತಿದ್ದಾರೆ, ನೀವು ರಾಜ್ಯದಲ್ಲಿ ಮಾಡಿದ ಅನ್ಯಾಯಗಳನ್ನು ಮುಚ್ಚಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದೀರಿ. ಇದಕ್ಕೆ ಕಾಂಗ್ರೆಸ್ ಕೂಡ ಸೂಕ್ತ ಉತ್ತರ ನೀಡಲಿದೆ. ನಾವು ಕೈಕಟ್ಟಿ ಸುಮ್ಮನೆ ಕುಳಿತುಕೊಳ್ಳುವುದಿಲ್ಲ,” ಎಂದು ಅವರು ಹೇಳಿದ್ದಾರೆ.
ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ನಿಜವಾದ ಜನಪರ ರಾಜಕೀಯ ಚಳುವಳಿಯಲ್ಲ. ಬದಲಾಗಿ, ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟನ್ನು ನಿವಾರಿಸುವ ಪ್ರಯತ್ನವಾಗಿದೆ, ಅವರು ಪಾದಯಾತ್ರೆ ನಡೆಸಲಿ. ಈ ಹಂತದಲ್ಲಿ ಕಾಂಗ್ರೆಸ್ ಯಾವ ರೀತಿಯ ಯಾತ್ರೆ ಅಥವಾ ಕಾರ್ಯಕ್ರಮ ಕೈಗೊಳ್ಳಲಿದೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ. ಆದರೆ, ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ,” ಎಂದು ತಿಳಿಸಿದ್ದಾರೆ.
ಕೆಪಿಎಸ್ಸಿ ಅಕ್ರಮ ಪ್ರಕರಣದಲ್ಲಿ ಬಿಜೆಪಿ ನಾಯಕರ ಸಂಪರ್ಕದ ಕುರಿತು ಕೆಲವು ಮಾಹಿತಿಗಳು ಲಭ್ಯವಿದ್ದು, ಅದನ್ನು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗೃಹ ಸಚಿವರ ಗಮನಕ್ಕೆ ತರಲಾಗಿದೆ, ಕೆಪಿಎಸ್ಸಿ ಅಕ್ರಮಗಳ ಹಿಂದೆ ಯಾರು ಇದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕು. ಅಮಾನತುಗೊಂಡ ಕೆಪಿಎಸ್ಸಿ ಅಧ್ಯಕ್ಷರನ್ನು ಯಾರು ನೇಮಿಸಿದರು ಹಾಗೂ ಬಿಜೆಪಿ ನಾಯಕರೊಂದಿಗೆ ಅವರ ಸಂಪರ್ಕ ಏನು ಎಂಬ ಬಗ್ಗೆಯೂ ತನಿಖೆಯಾಗಬೇಕು,” ಎಂದು ಶಿವಕುಮಾರ್ ಹೇಳಿದ್ದಾರೆ.